Saturday, April 25, 2020

ಮ ೧

ಮಂಗಳಮುಖಿ ೧

ತೋಟದ ಅಲ್ಲಿ ಹರಿದು ಬಿದ್ದಿದ್ದಂತಹ ವಿದ್ಯುತ್ ತಂತಿಯನ್ನು ಗಮನಿಸಿದ ಕಲ್ಲವ್ವನ ಗಂಡನು ಬೆಳೆಗೆ ನೀರು ಹಾಯಿಸಲು ಹೋಗಿ, ದೇಹದ ತುಂಬಾ ವಿದ್ಯುತ್  ಪ್ರವರ್ಸಿಸಿ ಮರಣಹೊಂದಿದ್ದನು. ಆಗಿನ್ನೂ ಚಿಕ್ಕ ವಯಸ್ಸು ಕಲ್ಲವ್ವನದು. ಒಬ್ಬನೆ ಮಗ, ಮೂರು ವರ್ಷದವನಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಈ ದುರ್ಗತಿ ಬಂದಿದ್ದನ್ನು ನೋಡಿ ಊರಿಗೆ ಊರೆ ದುಃಖದ ಮಡುವಿನಲ್ಲಿ ಮಿಂದಿತ್ತು. ತವರು ಮನೆಯವರು ಎಷ್ಟೊ ಒತ್ತಾಯವನ್ನು ಮಾಡಿದರು ತವರಿಗೆ ಕರೆದುಕೊಂಡು ಹೋಗಲು. ಕೊಟ್ಟು ಹೆಣ್ಣು ಕುಲಕ್ಕೆ ಹೊರಗೆ ಎಂಬಂತೆ ಕಲ್ಲವ್ವ ಕಲ್ಲುಬಂಡೆಯಂತೆ ಧೃಡ ನಿರ್ಧಾರಕ್ಕೆ ಬಂದುಬಿಟ್ಟಿದ್ದಳು. ಗಂಡನ ಪಾಲಿಗೆ ಬಂದಿದ್ದಂತಹ ಮೂರುವರೆ ಎಕರೆ ತೋಟದಲ್ಲೆ ದುಡಿದು, ಮಗುವನ್ನು ಬೆಳಸಿಕೊಂಡು, ಕಷ್ಟಾನೊ?, ಸುಖಾನೊ? ಬಂದದ್ದು ಬರಲಿ ಗಂಡನ ಮನೆ ಹೊಸ್ತಿಲನ್ನು ನಾನು ದಾಟಿ ಬರುವುದಿಲ್ಲ ಎಂದು ಹಿಡಿದುಕೊಂಡಿದ್ದ ಅವಳ ಹಠವೆ ಜಯಿಸಿತ್ತು. ಇವಳ ನಿರ್ಧಾರಕ್ಕೆ ಬೆಂಬಲವಾಗಿ, ಗಂಡನ ಪ್ರಾಣ ಸ್ನೇಹಿತನಾದಂತಹ ಸಣ್ಣಪ್ಪನು ಬೆಂಗಾವಲಾದನು. ಕಾಲದ ಸುರುಳಿ ಸುತ್ತುತ್ತಲೆ ಬಂದಿತು. ಸಣ್ಣಪ್ಪನ ಸಹಾಯ, ಬೆಂಬಲದೊಂದಿಗೆ ತೋಟವನ್ನು ನಳನಳಿಸತೊಡಗಿದಳು, ವರ್ಷಕ್ಕೆರಡು ಬೆಳೆಗಳು, ಕಾಲಕಾಲಕ್ಕೆ ಗೊಬ್ಬರ ನೀರನ್ನು ಕೊಡುತ್ತಾ ಬಂಗಾರದ ಬೆಳೆಯನ್ನು ಬೆಳೆಯುವಲ್ಲಿ, ಮಗನ ಆರೈಕೆ, ಅಭ್ಯಾಸದ ಕಡೆಗೂ ಗಮನವನ್ನು ಹರಿಸಿ, ಕಾಲೇಜ್ ನ್ನು ಸೇರಿಸಿದ್ದಳು. ಸಣ್ಣಪ್ಪನ ಮಗನು ಕಲ್ಲವ್ವನ ಮಗನು ಒಂದೆ ವಯಸ್ಸಿನವರಾದ್ದರಿಂದ ಇಬ್ಬರನ್ನು ಜೊತೆಗೂಡಿಯೆ ಪದವಿಪೂರ್ವ ಶಿಕ್ಷಣಕ್ಕೆ ಊರಿಂದ ಸುಮಾರ ಇಪ್ಪತ್ತೆರಡು ಕಿ. ಮೀ. ದೂರವಿರುವ ನಗರದ ಕಾಲೇಜಿನಲ್ಲಿ ಸೇರಿಸಿಬಂದಿದ್ದರು. 
ಎಲ್ಲವು ಸರಿಯಾಗಿಯೆ ನಡೆದುಕೊಂಡು ಹೊರಟಿತ್ತು.  

ಎಲ್ಲವೂ... ಸರಿಯಾಗಿ, ನಾವಂದುಕೊಂಡಂತೆಯೆ ನಮ್ಮ ಬದುಕಿನ ಹಾದಿ ಹಾಸಿದ್ದರೆ!!! ನರೇಂದ್ರ ಬುದ್ಧನಾಗುತ್ತಿರಲಿಲ್ಲ,
ರಾವಣ ಸಾಯುತ್ತಿರಲಿಲ್ಲ, ಗಾಂಧಿ ಮಹಾತ್ಮನಾಗುತ್ತಿರಲಿಲ್ಲ, 
ತಿಮ್ಮಕ್ಕ ಸಾಲುಮರಗಳ ತಾಯಿಯಾಗುತ್ತಿರಲಿಲ್ಲ, ವೀರಪ್ಪನ್ ಬಂದೂಕು ಹಿಡಿದುಕೊಳ್ಳುತ್ತಿರಲಿಲ್ಲ! ಕಾಡುವ ಹಸಿವಿಗೆ ಮಂಚವನೇರುವ ದುಸ್ಥಿತಿ ಅವಳಿಗೆ ಬರುತ್ತಿರಲಿಲ್ಲ ಬದುಕೆ ಹೀಗೆ ಅಲ್ಲವೆ? ಹಾದಿಯೊಳಗಿನ ಅದಾವ ತಿರುವು ಬಂದು ನಮ್ಮ ಬದುಕಿನ ದಿಕ್ಕನ್ನೆ ಬದಲಿಸಿಬಿಡುತ್ತದೆಯೋ? ಯಾರಿಗೆ ಗೊತ್ತು. ಹಾಲೆಂದುಕೊಂಡದ್ದು ವಿಷವಾಗಿಬಿಡುತ್ತದೆ,  ಕೊಳವಾಗಿದ್ದದ್ದು ಕೆಸರಾಗಿಬಿಡುತ್ತದೆ, ಕಲಿಸಿಟ್ಟ ಅಗುಳು ಹಳಸಿ ಹೋಗುತ್ತದೆ. ಹೀಗೆ ಶಶಿಕಾಂತನ ಯೌವ್ವನದ ಹಾದಿಯು ಒಂದು ತಿರುವನ್ನು ಕಂಡಿತು. 

ಸಣ್ಣಪ್ಪನ ಮಗ ನಾಗರಾಜನಿಗೂ ಗೊತ್ತಿರಲಿಲ್ಲ, ಕಾಲೇಜ್ ಬಿಟ್ಟ ತಕ್ಷಣ ಒಂದರ್ಧ ಗಂಟೆ ನಾಗರಾಜನನ್ನು ಬಸ್ ನಿಲ್ದಾಣದಲ್ಲಿಯೆ ಕೂರಿಸಿ, ಶಶಿಕಾಂತನು ಎಲ್ಲಿಗೂ ಹೋಗಿ ಬರುತ್ತಿದ್ದನು. ಬರುವಾಗ ಮಾತ್ರ ಅವನ ಮುಖ ತುಂಬು ಚಂದಿರನ ಬೆಳದಿಂಗಳಿಗಿಂತಲೂ ಹೆಚ್ಚು ಕಾಂತಿಯನ್ನು ಬಿರುವಂತೆ ತೋರುತ್ತಿತ್ತು. ನಾಗರಾಜ ಈ ವಿಷಯವನ್ನು ಎಷ್ಟು ಕೇಳಿದರು ಶಶಿಕಾಂತ ಒಂದಿನಾನು ಬಾಯ್ಬಿಟ್ಟಿರಲಿಲ್ಲ, ಟೈಂ ಬರ್ಲಿ ತಗೊಳ್ಲೆ ಮಗ್ನ ಆವಾಗ ನಿಂಗ ಎಲ್ಲಾ ಗೊತ್ತಾಕೈತಿ' ಎಂದು ಊರ ಬಸ್ಸನ್ನು ಹತ್ತಿ ಹಳ್ಳಿಯನ್ನು ತಲುಪುವವರೆಗೂ ಮೊಬೈಲ್ ನಲ್ಲಿ ಆ ವ್ಯಕ್ತಿಯೊಂದಿಗೆ ಮಾತನಾಡುತ್ತಲೆ ಇರುತ್ತಿದ್ದ.

ರಾತ್ರಿ ಎಂಟೂವರೆಯಾಗಿತ್ತು, ಸಣ್ಣಪ್ಪನು ಅದೆ ತಾನೆ ಊಟವನ್ನು ಮಾಡಿಕೊಂಡು ಬಂದು ಜಗುಲಿಯ ಮೇಲೆ ಕುಳಿತುಕೊಂಡಿದ್ದನು. ಮಡದಿ ಶಾಂತವ್ವ ವಿಳ್ಯೆದೆಲೆ ತಟ್ಟೆಯನ್ನು ತಂದು ಗಂಡನ  ಮುಂದಿಟ್ಟಳು. ಸಣ್ಣಪ್ಪನು ಒಂದೆರಡು ಎಲೆಗಳನ್ನು ತೆಗೆದುಕೊಂಡು ತೊಟ್ಟನ್ನು ಚಿವುಟಿ ಒಗೆದು,  ಬಲಗೈ ಹೆಬ್ಬರಳಿನಿಂದ ಸುಣ್ಣದ ಡಬ್ಬಿಯಲ್ಲಿದ್ದ ಸುಣ್ಣವನ್ನು ಗೀರಿಕೊಂಡು ಎಲೆಗಳಿಗೆ ಸವರಿ, ಒಣ ಕೊಬ್ಬರಿಯ ತುಂಡನ್ನು ಮುರಿದಿಟ್ಟುಕೊಂಡು ಎಲೆಯನ್ನು ಮಡಿಚಿ, ಬಾಯೊಳಗೆ ಹಾಕಿಕೊಂಡು ಜಗಿಯತೊಡಗಿದನು. ಹತ್ತು ನಿಮಿಷ ಕಳೆಯಿತು , ಎದುರು ಮನೆಯಿಂದ ಕಲ್ಲವ್ವ ಮೈ ತುಂಬಾ ಸೆರಗನ್ನು ಹೊದ್ದುಕೊಂಡು ಬಂದಳು 'ಯಣ್ಣಾ ಊಟಾಯ್ತಾ?, ಅತ್ತೆಮ್ಮ ನಿಂದು' ಎಂದು ಕೇಳುತ್ತಲೆ ತಲೆಯ ಮೇಲಿನ ಸೆರಗನ್ನು ಸರಿಪಡಿಸಿಕೊಳ್ಳುತ್ತಾ, ಸಣ್ಣಪ್ಪನ ಹೆಂಡತಿಯ ಹತ್ತಿರಕ್ಕೆ‌ ಬಂದು ನಿಂತಳು. ಸಣ್ಣಪ್ಪನೆಂದರೆ ಎಲ್ಲಿಲ್ಲದ ಭಯ, ಭಕ್ತಿ, ಗೌರವ ಅಲ್ಲದೆ ಸ್ವಂತ ಅಣ್ಣನಿಗಿಂತಲೂ ಒಂದು ಕೈ ಮೇಲೆಯೆ ಎನ್ನುವಂತಿದ್ದ ನಂಬಿಕೆ.
ಸಣ್ಣಪ್ಪ ಬಾಯಲ್ಲಿ ತುಂಬಿಕೊಂಡಿದ್ದ ವಿಳ್ಳದ ರಸವನ್ನು ಕಟ್ಟೆಯಾಚೆಗೆ ಉಗಿಯುತ್ತಾ, 'ನಿಂದೂಟ ಆತನವಾ?'
'ಹ್ಞೂಂ' 
'ಮತ್ತೇನವ ಸಮಾಚಾರ, ಬೆಳಿಗೆ ಹುಳಾ ಬಿದ್ದಾವಂತ, ಆ ಹಿತ್ಲಮನಿ ಸೀನ್ಯಾಗ ಹೇಳಿನಿ, ಹೊತ್ತಾರೆನೆ ಹೋಗ್ಬಿಟ್ಟು ಬೆಳಿಗೆಲ್ಲಾ ಎಣ್ಣಿ ಹೊಡ್ದಬಿಟ್ಟ ಬಂದ್ಬಿಡು ಅಂತಂದೀನಿ'
'ಹಂಗಾ ಆಗ್ಲಾಳಣ್ಣ' ಸೋತ ಧ್ವನಿಯಲ್ಲಿ ಮಾತನಾಡಿದಳು.
ಅವಳ ಮಾತಿನಲ್ಲಿ ಗೆಲುವಿಲ್ಲದಿರುವುದನ್ನು ಕಂಡುಕೊಂಡ ಸಣ್ಣಪ್ಪನು, ಮುಂದೆ ತುಂಬಿಟ್ಟಿದ್ದ ಚರಿಗೆ ನೀರನ್ನು ಎತ್ತಿಕೊಂಡು ಬೀದಿಯ ಪಕ್ಕಬಂದು, ಬಾಯಲ್ಲಿ ಹಾಕಿಕೊಂಡಿದ್ದ ವಿಳ್ಯದೆಲೆಯನ್ನು ಉಗುಳಿ, ಚರಿಗೆ ನೀರಿನಿಂದ ಬಾಯನ್ನು ತೊಳೆದುಕೊಂಡು, ಮರಳಿ ಕಟ್ಟೆಯ ಮೇಲೆ‌ ಕುಳಿತುಕೊಂಡು ಗಂಭೀರವಾಗಿ ಮಾತನಾಡಲು ಗಂಟಲನ್ನು ಕೆಮ್ಮಿ ಧ್ವನಿಯನ್ನು ಸರಿಪಡಿಸಿಕೊಂಡು ಎರಡು ನಿಮಿಷ ಸುಮ್ಮನಿದ್ದು, 'ಹೇಳವಾ ಏನ್ ವಿಷ್ಯಾ ಅಂತಂದ್ರ .

No comments:

Post a Comment